ವರದಿಗಾರ-ಮೇ.05: ತಮಿಳುನಾಡಿನ ಫಲಿತಾಂಶ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮಗೆ ಅಚ್ಚರಿ ತಂದಿದೆ. ತಮಿಳುನಾಡಿನಲ್ಲಿ ಹೊಸ ಯುಗ ಆರಂಭವಾಗಿದೆ ಎಂದು ಹೇಳಿ ಯೂಟರ್ನ್ ಹೊಡೆದಿದ್ದಾರೆ.
ಚುನಾವಣಾ ಪೂರ್ವ ʼವಿಜಯ್ ಒಬ್ಬ ಅಪ್ರಬುದ್ಧ ರಾಜಕಾರಣಿʼ ಎಂದು ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು. ಸದ್ಯ ವಿಜಯ್ ಎಲ್ಲಾ ಅಡೆತಡೆಗಳನ್ನು ಮೀರಿ ಗೆದ್ದು ಬೀಗಿದ್ದಾರೆ. ವಿಜಯ್ ಅದ್ವಿತೀಯ ಗೆಲುವು ಡಿಕೆ ಶಿವಕುಮಾರ್ ಗೆ ಸಿಕ್ಕಿದ ಮಂಗಳಾರತಿ ಎಂಬುವುದಾಗಿ ರಾಜಕೀಯ ವಿಶ್ಲೇಷಕರು ಆಡಿಕೊಳ್ಳುತ್ತಿದ್ದಾರೆ.
ಡಿಕೆ ಶಿವಕುಮಾರ್ ಮಾಧ್ಯಮದೊಂದಿಗೆ ಮಾತನಾಡುತ್ತಾ, ಅಲ್ಲಿನ ಜನರ ನಾಡಿಮಿಡಿತಕ್ಕೆ ಸ್ಪಂದಿಸಲು ನಮಗೆ ಸಾಧ್ಯವಾಗಲಿಲ್ಲ. ಈ ಚುನಾವಣೆಯಲ್ಲಿ ನಟ ವಿಜಯ್ ಅವರ ಮುಂದಾಳತ್ವದ ಪಕ್ಷ ಶೇಕಡಾ 30 ರಿಂದ 40 ರಷ್ಟು ಮತ ಪಡೆಯಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಇದಕ್ಕಿಂತಲೂ ಹೆಚ್ಚಿನ ಜನ ಬೆಂಬಲ ಅವರಿಗೆ ಸಿಕ್ಕಿದೆ ಎಂದು ಡಿಕೆಶಿ ಹೇಳಿದ್ದಾರೆ.
ಸ್ಟಾಲಿನ್ ಅವರ ಜೊತೆ ರಾಹುಲ್ ಗಾಂಧಿ ಅವರು ಎಲ್ಲಿಯೂ ಕಾಣಿಸಿಕೊಳ್ಳಲಿಲ್ಲ ಎನ್ನುವ ಬಗ್ಗೆ ಕೇಳಿದಾಗ, “ಆ ಬಗ್ಗೆ ಮಾತನಾಡಲು ನಾನು ಹೋಗುವುದಿಲ್ಲ. ಹೈಕಮಾಂಡ್ ತೀರ್ಮಾನ ಮಾಡಿದಂತೆ ನಾವೆಲ್ಲರೂ ಅಲ್ಲಿಗೆ ಹೋಗಿದ್ದೇವಲ್ಲ” ಎಂದರು. ಕೇರಳದಲ್ಲಿ ಯುಡಿಎಫ್ ಗೆಲುವು ನಿರೀಕ್ಷಿತವಾಗಿತ್ತು. ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದ್ದ ಎಲ್ಡಿಎಫ್ ವಿರುದ್ಧ ಜನ ಬದಲಾವಣೆ ಬಯಸಿದ್ದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೇ ನಮಗೆ ಇದರ ಸುಳಿವು ಸಿಕ್ಕಿತ್ತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
