ಪರೀಕ್ಷಾ ಅಕ್ರಮ ಖಂಡಿಸಿ ನಡೆದ ಮೆರವಣಿಗೆಯನ್ನು ತಡೆಯಲು ಅಶ್ರುವಾಯು, ಲಾಠಿಚಾರ್ಜ್ ಮತ್ತು ಇಂಟರ್ನೆಟ್ ಬಂದ್ ಬಳಸಿದ ಆರೋಪ; ತನಿಖೆಗೆ ಮಾನವ ಹಕ್ಕುಗಳ ಸಂಸ್ಥೆ ಒತ್ತಾಯ
ದೆಹಲಿ: ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಸಂಸತ್ತಿಗೆ ಮೆರವಣಿಗೆ ಹೊರಟಿದ್ದ ವಿದ್ಯಾರ್ಥಿ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ಹಾಗೂ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸುವ ಮೂಲಕ ಅತಿಯಾದ ಬಲಪ್ರಯೋಗ ಮಾಡಿದ್ದಾರೆ ಎಂದು ಜಾಗತಿಕ ಮಾನವ ಹಕ್ಕುಗಳ ಸಂಸ್ಥೆ ಆಮ್ನೆಸ್ಟಿ ಇಂಟರ್ನ್ಯಾಷನಲ್ ಆರೋಪಿಸಿದೆ. ಈ ಕುರಿತು ತಕ್ಷಣವೇ ಸ್ವತಂತ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸಂಸ್ಥೆ ಒತ್ತಾಯಿಸಿದೆ.
ಲಕ್ಷಾಂತರ ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ ಎನ್ನಲಾದ ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಆದರೆ, ಪೊಲೀಸರು ಶಾಂತಿಯುತವಾಗಿ ಧರಣಿ ನಡೆಸುತ್ತಿದ್ದವರ ಮೇಲೆ ಬಲಪ್ರಯೋಗ ಮಾಡಿದ್ದಾರೆ ಎಂದು ಆಮ್ನೆಸ್ಟಿ ಹೇಳಿದೆ. ಪ್ರತಿಭಟನೆಯನ್ನು ತಡೆಯಲು ಮೆಟ್ರೋ ಸೇವೆಗಳನ್ನು ಸ್ಥಗಿತಗೊಳಿಸಿ, ಮೊಬೈಲ್ ಇಂಟರ್ನೆಟ್ ಸೇವೆಯನ್ನು ಬಂದ್ ಮಾಡಲಾಗಿತ್ತು ಎಂದು ಸಂಸ್ಥೆ ಉಲ್ಲೇಖಿಸಿದೆ.
ಪೊಲೀಸರ ನಡವಳಿಕೆಯನ್ನು ಖಂಡಿಸಿರುವ ಆಮ್ನೆಸ್ಟಿ, ಪ್ರತಿಭಟನಾಕಾರರ ವಿರುದ್ಧ ನಡೆದಿದೆ ಎನ್ನಲಾದ ಕಾನೂನುಬಾಹಿರ ನಡವಳಿಕೆಗಳ ಕುರಿತು ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ಜವಾಬ್ದಾರರನ್ನು ಹೊಣೆಗಾರರನ್ನಾಗಿ ಮಾಡಬೇಕಾಗಿದೆ ಎಂದು ಭಾರತೀಯ ಅಧಿಕಾರಿಗಳನ್ನು ಆಗ್ರಹಿಸಿದೆ.
