ವರದಿಗಾರ (ಸೆ.30): ಬಾಬರಿ ಮಸೀದಿ ಧ್ವಂಸ ಪ್ರಕರಣದ 32 ಆರೋಪಿಗಳನ್ನು ಖುಲಾಸೆಗೊಳಿಸಿರುವ ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪು ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಂಯ್ಯ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ನ್ಯಾಯಾಲಯ 2019ರ ಸುಪ್ರೀಮ್ ಕೋರ್ಟ್ ತೀರ್ಪು ಮತ್ತು ಸಂವಿಧಾನದ ಆಶಯಗಳನ್ನು ಗಮನಕ್ಕೆ ತೆಗೆದುಕೊಂಡ ಹಾಗೆ ಕಾಣುತ್ತಿಲ್ಲ. ‘ಬಾಬರಿ ಮಸೀದಿ ಧ್ವಂಸ ನೆಲದ ಕಾನೂನಿಗೆ ವಿರುದ್ಧವಾದ ಕೃತ್ಯ’ ಎಂದು 2019 ನವಂಬರ್ 9ರ ಸುಪ್ರೀಮ್ ಕೋರ್ಟ್ ತೀರ್ಪು ಹೇಳಿದೆ. ಈಗ ಸಿಬಿಐ ವಿಶೇಷ ನ್ಯಾಯಾಲಯ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಾಬರಿ ಮಸೀದಿ ಧ್ವಂಸ ಮಾಡಿದವರು ಯಾರೆಂಬ ಪ್ರಶ್ನೆ ಹಾಗೆಯೇ ಉಳಿದಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೇಂದ್ರ ಮತ್ತು ಉತ್ತರ ಪ್ರದೇಶ ಸರ್ಕಾರಗಳು ಸಿಬಿಐ ವಿಶೇಷ ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಿ ಬಾಬರಿ ಮಸೀದಿ ಧ್ವಂಸ ಮಾಡಿದ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
