ವರದಿಗಾರ (ಅ.5): ಉಪ ಚುನಾವಣೆಯ ಸಂದರ್ಭದಲ್ಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ನಿವಾಸಗಳು ಹಾಗೂ ಕಚೇರಿ ಸೇರಿದಂತೆ 15 ಸ್ಥಳಗಳಲ್ಲಿ ಸಿಬಿಐ ಅಧಿಕಾರಿಗಳು ಇಂದು ಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. 60ಕ್ಕೂ ಹೆಚ್ಚು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಸಿಬಿಐ ಪೊಲೀಸ್ ವರಿಷ್ಠಾಧಿಕಾರಿ ಥಾಮ್ಸನ್ ಜೋಸ್ ನೇತೃತ್ವದಲ್ಲಿ ಶಿವಕುಮಾರ್ ಅವರ ಸದಾಶಿವ ನಗರದ ಎರಡು ನಿವಾಸ, ಸಂಸದ ಡಿ.ಕೆ.ಸುರೇಶ್ ಅವರ ಎರಡು ಮನೆ, ರಾಮನಗರ ಜಿಲ್ಲೆಯ ದೊಡ್ಡ ಆಲಹಳ್ಳಿ, ಕನಕಪುರ ಹಾಗೂ ಡಿ.ಕೆ.ಶಿವಕುಮಾರ್ ಅವರ ಒಡೆತನದ ಕಚೇರಿಗಳಲ್ಲಿಯೂ ಪರಿಶೀಲನೆ ನಡೆಸಲಾಗುತ್ತಿದೆ.
ಸಿಬಿಐ ದಾಳಿಯನ್ನು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತೀವ್ರವಾಗಿ ಖಂಡಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿ, ಶಿವಕುಮಾರ್ ಮನೆ ಮೇಲೆ ಸಿಬಿಐಯನ್ನು ಸಾಕು ನಾಯಿಯಾಗಿಸಿ ದಾಳಿ ನಡೆಸುವ ಮೂಲಕ ನಮ್ಮನ್ನು ಬೆದರಿಸುವ ಮೋದಿ- ಯಡಿಯೂರಪ್ಪ ಜೋಡಿಯ ಕಪಟ ನಾಟಕ ಯಶಸ್ವಿಯಾಗುವುದಿಲ್ಲ. ಯಡಿಯೂರಪ್ಪ ಸರ್ಕಾರದ ಭ್ರಷ್ಟಾಚಾರಗಳನ್ನು ಸಿಬಿಐ ಪರಿಶೋಧಿಸಬೇಕಿತ್ತು. ಆದರೆ ದಾಳಿ ರಾಜನದ್ದು ಯಾವಾಗಲೂ ಕಪಟತನ ನಡೆ ಮಾತ್ರವಾಗಿದೆ ಎಂದು ಕಿಡಿಕಾರಿದ್ದಾರೆ.
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಾಳಿಯನ್ನು ಖಂಡಿಸಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನೆ ಮೇಲೆ ನರೇಂದ್ರ ಮೋದಿ ಸರ್ಕಾರ ನಡೆಸಿರುವ ಸಿಬಿಐ ದಾಳಿ ರಾಜಕೀಯ ದುಷ್ಟತನದ ಪರಮಾವಧಿ, ಇದು ಕಾಂಗ್ರೆಸ್ ಪಕ್ಷವನ್ನು ರಾಜಕೀಯವಾಗಿ ಎದುರಿಸಲಿಕ್ಕಾಗದ ಬಿಜೆಪಿ ನಾಯಕರ ನೈತಿಕ ದಿವಾಳಿತನವನ್ನು ತೋರಿಸುತ್ತದೆ ಎಂದು ಟ್ವೀಟ್ ಮೂಲಕ ಹರಿಹಾಯ್ದಿದ್ದಾರೆ.
